




ಕಾರ್ಕಳ: ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಟಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಯಾನೆ ಮುನ್ನ(37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಇವರು ಜ.3ರಂದು ಪಾರ್ಕ್ನ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ ಕಟ್ಟಡದ ಮೇಲ್ಯಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಿದ್ದು ವಿಶೇಷ ಪೊಲೀಸ್ ತಂಡವು ಉಡುಪಿ, ದ.ಕ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಡಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿಗಳಿಂದ ಕಳವು ಮಾಡಿದ 45,000 ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ ಹಾಗೂ 1200ರೂ. ಮೌಲ್ಯದ 2 ಸಿಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ 1 ಲಕ್ಷ ರೂ. ಮೌಲ್ಯದ ಗೂಡ್ಸ್ ಅಟೋರಿಕ್ಷಾ, 70,000ರೂ. ಮೌಲ್ಯದ ಬೈಕ್, ತಲೆಮರೆಸಿಕೊಂಡ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೀಫ್ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಹಾಗೂ ಮುಲ್ಕಿ ಮೂಡುಬಿದಿರೆ ಪೊಲೀಸ್ ಠಾಣೆಗಳಲ್ಲಿ 9 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಮೀದ್ ವಿರುದ್ಧ ಬಜಪೆ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.








