


ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿಯನ್ನು ಕಾರ್ಕಳ ಪೊಲೀಸರು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೃಷ್ಣ ನಾಯ್ಕ (45) ಎಂದು ಗುರುತಿಸಲಾಗಿದೆ.
ಆರೋಪಿ ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಹಾಕಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಗೊಳಿಸಿತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.