


ಕಾರ್ಕಳ: ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ.
ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರು ಸಮಾಜ ಸೇವಕ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರಿಗೆ ಮಾಹಿತಿ ನೀಡಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ದೇಹವು ಕೊಳೆತ ಸ್ಥಿತಿಯಲ್ಲಿದ್ದುದನ್ನು ಗಮನಿಸಿದ ಅಧಿಕಾರಿಗಳು, ಇದು ಎರಡು-ಮೂರು ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.
ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ನೇತೃತ್ವದ ತಂಡವು ಚಿರತೆಯ ದೇಹವನ್ನು ಬಾವಿಯಿಂದ ಮೇಲೆತ್ತಿ, ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ನಂತರ ನಿಯಮಾನುಸಾರ ಚಿರತೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.








