


ಕ್ಯಾಲಿಫೋರ್ನಿಯಾ: ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ. ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಾಕೇತ್ ಶ್ರೀನಿವಾಸಯ್ಯ (22) ಮೃತ ವಿದ್ಯಾರ್ಥಿ.
ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಛೇರಿ ದೃಢಪಡಿಸಿದೆ. ವಿದ್ಯಾರ್ಥಿಯ ಶವವನ್ನು ಭಾರತಕ್ಕೆ ವಾಪಸ್ ಕಳುಹಿಸಲು ಅಗತ್ಯವಿರುವ ಎಲ್ಲಾ ಸಹಾಯ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದು, ಅವರ ಅಕಾಲಿಕ ಸಾವಿನಿಂದ ದುಃಖಕ್ಕೊಳಗಾದ ಕುಟುಂಬದ ಜೊತೆ ನಾವು ನಿಲ್ಲುತ್ತೇವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ಕಛೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿಯಾಗಿದ್ದ ಅವರು, ಬರ್ಕ್ಲಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಅವರು ಬೆಂಗಳೂರಿನ ಶ್ರೀ ವಾಣಿ ಶಿಕ್ಷಣ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಸಾಕೇತ್ ಕಾಲೇಜು ಕ್ಯಾಂಪಸ್ನಿಂದ ಒಂದು ಕಿಲೋಮೀಟರ್ ದೂರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದು, ನಂತರ ಅವರಿಗಾಗಿ ಲೇಕ್ ಅಂಜಾ ಮತ್ತು ಬರ್ಕ್ಲಿ ಹಿಲ್ಸ್ ಪ್ರದೇಶಗಳಲ್ಲಿ ನಗರದಾದ್ಯಂತ ಹುಡುಕಾಟ ನಡೆಸಲಾಗಿತ್ತು ಎಂದು ತಿಳಿದುಬಂದಿದೆ.
ಸಾಕೇತ್ ಫೆ.9 ರಂದು ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.








