ನವದೆಹಲಿ* : ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮನ್ ನಿಧಿ (PM Kisan Samman Nidhi) ಯೋಜನೆಯ ಮೊದಲ ಕಂತಿನ ಹಣವನ್ನ ಬಿಡುಗಡೆ ಮಾಡಿದರು. ದೇಶದ ಸುಮಾರು 9 ಕೋಟಿ ರೈತರ ಖಾತೆಗೆ ಒಟ್ಟು 18 ಸಾವಿರ ಕೋಟಿ ರೂಪಾಯಿ ಹಣ ಜಮೆಯಾಗಿದೆ.
ಕಳೆದ ಒಂದು ತಿಂಗಳಿನಿಂದ ರೈತರು, ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಮಾತುಕತೆ ನಡೆದರೂ ಯಾವುದೇ ಸಭೆಗಳು ಫಲಪ್ರದವಾಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ತಾನು ಜಾರಿ ಮಾಡಿರುವ ನೂತನ ಕೃಷಿ ಕಾಯ್ದೆಯ ಪರ ಅಭಿಯಾನ ನಡೆಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಪ್ರಧಾನಿ ಮೋದಿ ಅವರು ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಹಣ ವರ್ಗಾವಣೆ ಮಾಡಿದ್ದಾರೆ.
ಪಿಎಂ-ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಪ್ರತಿ ವರ್ಷ 6000 ರೂ. ಆರ್ಥಿಕ ನೆರವನ್ನು ನೀಡಲಾಗುವುದು. ರೈತರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಗಿಸಲಾಗುತ್ತದೆ. ವಾರ್ಷಿಕವಾಗಿ ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ಸರ್ಕಾರವು ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಮೂರು ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡುತ್ತದೆ. ಹಣವನ್ನು 4 ತಿಂಗಳಿಗೊಮ್ಮೆ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುವುದು. ಈ ನಿಧಿಯನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು.