Wednesday, July 22, 2026
spot_imgspot_img
spot_imgspot_img

ಕೊಡಗು: ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆ – ಮಹಿಳೆಯ ಶೋಧಕ್ಕೆ 5 ತಂಡ ರಚನೆ, ಡ್ರೋನ್‌, ಶ್ವಾನದಳ ಬಳಕೆ

- Advertisement -
- Advertisement -

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಮಹಿಳೆ ಶರಣ್ಯ (36) ನಾಪತ್ತೆ ಪ್ರಕರಣ ಸಂಬಂಧ 4ನೇ ದಿನವೂ ಶೋಧ ಕಾರ್ಯ ಮುಂದುವರಿದಿದೆ. ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಕೇರಳದ ಶರಣ್ಯ ಒಬ್ಬಂಟಿಯಾಗಿ ಟ್ರೆಕ್ಕಿಂಗ್‌ಗೆ ಬಂದಿದ್ದರೆಂದು ಪೋಲೀಸರು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ಕಿಂಗ್ ಮಾಡಿಕೊಂಡಿದ್ದ ಶರಣ್ಯ ಚಾರಣಕ್ಕೆ ಒಬ್ಬರೇ ಬಂದಿದ್ದರು, ಒಬ್ಬರೇ ಹೋಗುವುದಾಗಿಯೂ ಹೇಳಿದ್ದರು. ಆದ್ರೆ ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿತ್ತು. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದರು. ಆ ದಿನ ಸಂಜೆ ಸ್ಥಳೀಯರು ಕುಡಿಯರ ಮುತ್ತಪ್ಪ ನೇತೃತ್ವದಲ್ಲಿ ಅರಣ್ಯ ಇಲಾಖೆ ಪೊಲೀಸ್ ಸಿಬ್ಬಂದಿ ಜೊತೆಗೂಡಿ ತಡರಾತ್ರಿಯವರೆಗೂ ಹುಡುಕಾಟ ನಡೆದ್ದರು. ಇಂದು ಶೋಧ ಕಾರ್ಯ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಶರಣ್ಯ ಸುಳಿವು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಮತ್ತು ಪೋಲಿಸರು ಶುಕ್ರವಾರ ಬೆಳಿಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಪೋಕ್ಲು ಎಸ್‌ಐ ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಗ್ರಾಮಸ್ಥರೂ ನೆರವಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಎಸ್ಪಿ ಬಿಂದುಮಣಿ ಅವರು, ಶರಣ್ಯ ಕೇರಳದಲ್ಲಿಯೇ ಉದ್ಯೋಗ ಮಾಡಿಕೊಂಡಿದ್ದರು. ಆಕೆ ಕಾಣೆಯಾಗಿರುವ ಬಗ್ಗೆ ಕೇರಳದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಮತ್ತೊಂದೆಡೆ ಶೋಧ ಕೂಡ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಮಹಿಳೆಯ ಶೋಧ ಕಾರ್ಯಕ್ಕೆ 5 ವಿಶೇಷ ತಂಡಗಳನ್ನ ರಚನೆ ಮಾಡಲಾಗಿದ್ದು, ಇದರಲ್ಲಿ ಸ್ಥಳೀಯ ಪೊಲೀಸರ 2 ತಂಡ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ 3 ತಂಡಗಳಿವೆ. ಅಲ್ಲದೇ ಕಾರ್ಯಾಚರಣೆಗೂ ಡ್ರೋನ್‌, ಶ್ವಾನದಳ ಕೂಡ ಬಳಕೆ ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!