




ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಕುಂದಾಪುರದ ಕಡ್ಲಿಮನೆ ರಸ್ತೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಮೂಡ್ಲಕಟ್ಟೆ ಸಮೀಪದ ಕಂದಾವರ ಸಾಂತಾವರ ನಿವಾಸಿ ಶಿವರಾಜ್(35) ಮೃತಪಟ್ಟ ಯುವಕ. ಶಿವರಾಜ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಗಾರೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ಇಲ್ಲಿನ ಕಡ್ಡಿಮನೆ ರಸ್ತೆಯ ಕೊನೆಯಲ್ಲಿ ಪ್ರವೀಣ್ ಖಾರ್ವಿ ಎಂಬವರ ನಿರ್ಮಾಣ ಹಂತದಲ್ಲಿರುವ ಮನೆಯ ಗಾರೆ ಕೆಲಸಕ್ಕೆ ಸೋಮವಾರ ಶಿವರಾಜ್ ಹಾಗೂ ಇತರರು ಬಂದಿದ್ದು, ತನ್ನ ಜತೆ ಕೆಲಸ ಮಾಡುವ ಇನ್ನಿಬ್ಬರು ಕೆಲಸಗಾರರೊಂದಿಗೆ ಕಬ್ಬಿಣದ ಏಣಿಯನ್ನು ಬೇರೆ ಕಡೆಗೆ ಹೊತ್ತೊಯ್ಯುವಾಗ ಆಕಸ್ಮಿಕವಾಗಿ ಏಣಿಯು ಅಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿ ಶಾಕ್ ತಗಲಿದೆ.
ಶಿವರಾಜ್ ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.








