ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಮಡಪ್ಪಾಡಿ ಗ್ರಾಮ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡುವ ಅಭಿಯಾನಕ್ಕೆ ಡಿ.5 ರಂದು ಚಾಲನೆ ನೀಡಲಾಗುವುದು.
ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಸುಳ್ಯ ತಹಶೀಲ್ದಾರ್ ಅನಂತಶಂಕರ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ, ಮಡಪ್ಪಾಡಿ ಗ್ರಾ.ಪಂ.ಆಡಳಿತಾಧಿಕಾರಿ ಸುರೇಶ್ , ಮಂಗಳೂರು ರೋಹನ್ ಕಾರ್ಪೊರೇಷನ್ ಸಂಸ್ಥೆಯ ಚೇರ್ಮನ್ ರೋಹನ್ ಮೊಂತೆರೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಒಂದು ಕೆ.ಜಿ ಪ್ಲಾಸ್ಟಿಕ್ ತರುವ ಗ್ರಾಮಸ್ಥರಿಗೆ 10 ಕೆ.ಜಿ.ಅಕ್ಕಿ, 500 ಗ್ರಾಂ. ಪ್ಲಾಸ್ಟಿಕ್ ಗೆ 5 ಕೆ.ಜಿ.ಅಕ್ಕಿ, 100 ಗ್ರಾಂ. ಪ್ಲಾಸ್ಟಿಕ್ ನೀಡಿದವರಿಗೆ 1 ಕೆ.ಜಿ. ಅಕ್ಕಿಯನ್ನು ಸಾಂಕೇತಿಕವಾಗಿ ವಿತರಿಸಲಾಗುವುದು.