ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯವಿದ್ದು, ಜೂ.16 ಮತ್ತು 17ರಂದು ಕೆಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಿಗೆ ಜೂ.16 ಮತ್ತು 17ರಂದು ಕೆಲವೆಡೆ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹಾಗೂ ಜೂನ್ 18ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ. ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ವಾಯುಭಾರ ಕುಸಿತ(ದಟ್ಟ ಮೋಡ) ಉಂಟಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂ.18ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ್ ಜಿಲ್ಲೆಗೆ ಜೂನ್ 17ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ, ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಜೂ.17ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45ರಿಂದ 55 ಕಿ.ಮೀ. ಇರುವ ಸಾಧ್ಯತೆ ಇದ್ದು, ಹೀಗಾಗಿ, ಜೂನ್ 17ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.