


ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಒಟ್ಟು 4,95,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಗಳನ್ನು ಬಂಟ್ವಾಳ ತಾಲೂಕು ಕೊಲ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಅಬ್ದುಲ್ ರಹಿಮಾನ್ (42)ಮತ್ತು ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಜೋಗಿಬೆಟ್ಟು, ಅಡವಿನಬಾಗಿಲು ನಿವಾಸಿ ಮೊಹಮ್ಮದ್ ಜಿಯಾದ್ (22) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಆರೋಪಿಗಳಿಂದ 1,75,000 ರೂಪಾಯಿ ಮೌಲ್ಯದ 35 ಗ್ರಾಂ ಎಂಡಿಎಂಎ, ತಲಾ 10,000 ರೂ. ಬೆಲೆಯ ಎರಡು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ, 3 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಆಲ್ಟೊ 800 ಕಾರು ಸೇರಿದಂತೆ ಒಟ್ಟು 4,95,000 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಬೆಂಗಳೂರಿನಿಂದ ವಿದೇಶಿ ಪ್ರಜೆಯಿಂದ ಎಂಡಿಎಂಎ ಖರೀದಿಸಿ ತಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಹಳೆ ಆರೋಪಿಗಳಾಗಿದ್ದು, ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕೇಸುಗಳಿವೆ. ಆರೋಪಿ ಅಬ್ದುಲ್ ರಹಿಮಾನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿವೆ. ಆರೋಪಿ ಮೊಹಮ್ಮದ್ ಜಿಯಾದ್ ಮೇಲೆ ಎಂಡಿಎಂಎ ಸೇವನೆ ಮಾಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಇದೆ.