




ಮಂಗಳೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕಂಕನಾಡಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತರನ್ನು ಕೊಡಗು ವೀರಾಜಪೇಟೆ ಬೆಳ್ಳುರು ಗ್ರಾಮದ ಸಚಿನ್ ಮತ್ತು ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಎಂದು ಗುರುತಿಸಲಾಗಿದೆ.
ಕುಲಶೇಖರದ ಕೆಎಂಎಫ್ ಡೈರಿ ಬಳಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಮೇ 11ರಂದು ಕುಲಶೇಖರ ಕೆಎಂಎಫ್ ಡೈರಿ ಬಳಿಯಿರುವ ಮನೆಗೆ ನುಗ್ಗಿದ ಕಳ್ಳರು 87.5 ಗ್ರಾಂ ಚಿನ್ನಾಭರಣ ಕಳವುಗೈದಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 4,29,500ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಉಪಯೋಗಿಸಿದ 7 ಲಕ್ಷ ರೂ. ಬೆಲೆಬಾಳುವ ಕಾರು ಸಹಿತ 11.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಸಚಿನ್ ವಿರುದ್ಧ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ಹಾಗೂ ನಿಶಾಂತ್ ವಿರುದ್ಧ ಕೊಡಗು ಜಿಲ್ಲೆಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.