ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದು , ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ವಯನಾಡಿನ ಅನೂಪ್ ಎಂ.ಎಸ್(28) ಮತ್ತು ಕಣ್ಣೂರಿನ ಲತೀಪ್ ಕೆ.ವಿ(36) ಎಂದು ಗುರುತಿಸಲಾಗಿದೆ.
ಈ ಬ್ರಹತ್ ಪ್ರಮಾಣದ ಗಾಂಜಾ ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಉಳ್ಳಾಲದ ತಲಪಾಡಿಯಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಭಾರಿ ಪ್ರಮಾಣದಲ್ಲಿ ಗಾಂಜಾ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಗಾಂಜಾ, ಸಾಗಟದ ವಾಹನ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ. 35,14,520/ ಮೌಲ್ಯದ ವಸ್ತುಗಳನ್ನು ಪೋಲಿಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.