ಮಂಗಳೂರು(ನ.5): ಶಿರಾ ಹಾಗೂ ಆರ್.ಆರ್.ನಗರದ ಉಪಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ನಡೆಯಿತು. ಕಾಂಗ್ರೆಸ್ ನೂರಕ್ಕೆ ನೂರು ದಯನೀಯ ಸೋಲು ಅನುಭವಿಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳೂರಿನಲ್ಲಿ ತಿಳಿಸಿದರು.
ದೆಹಲಿಯಿಂದ ಸುದ್ದಿ ಬಂದಿದೆ ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳುತ್ತಿದ್ದಾರೆ. ನಾನು ಕೂಡ ದೆಹಲಿಯಿಂದ ಸುದ್ದಿ ಬಂದಿದ್ದೇನೆ ಸಿದ್ದರಾಮಯ್ಯನವರ ಪ್ರತಿಪಕ್ಷ ನಾಯಕರ ಸ್ಥಾನ ಬದಲಾವಣೆ ಆಗುತ್ತದೆ ಎಂದು ಹೇಳಬಹುದು. ಆ ತರಹ ಹಗುರವಾಗಿ ಮಾತನಾಡಲು ಇಷ್ಟಪಡುವುದಿಲ್ಲ. ಜವಾಬ್ದಾರಿಯಿಂದ ಸಿದ್ದರಾಮಯ್ಯ ಮಾತನಾಡಲಿ ಎಂದು ವಿನಂತಿ ಮಾಡುತ್ತೇನೆ ಎಂದು ಸಿಎಂ ಹೇಳಿದರು.
ಬಹಳ ವರ್ಷಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳೂರಿನಲ್ಲಿ ನಡೆಯುತ್ತಿದೆ. ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲಾ ಜಿಲ್ಲೆಗಳನ್ನು ಸುತ್ತಾಡಿ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯಲಿದೆ. ಅಲ್ಲದೆ ಮುಂದೆ ಎರಡೂವರೆ ವರ್ಷಗಳ ಬಳಿಕ ನಡೆಯುವ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಬಿಎಸ್ ಯಡಿಯೂರಪ್ಪನವರು ಹೇಳಿದರು.