ಮಂಗಳೂರು: ಮಾಧ್ಯಮ ಪ್ರತಿನಿಧಿಗಳನ್ನು ರಾಜ್ಯ ಸರಕಾರ ಕೋವಿಡ್ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತದಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಸುರಕ್ಷಾ ಲಸಿಕಾ ಅಭಿಯಾನ ಇತ್ತೀಚೆಗೆ ನಡೆಯಿತು.
ವಿವಿಧ ತಾಲೂಕು ಪತ್ರಕರ್ತರ ಸಂಘ ಹಾಗೂ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ಜಿಲ್ಲೆಯಾದ್ಯಂತ ಅಭಿಯಾನ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು. ಈ ಅಭಿಯಾನದ ಮೂಲಕ ಜಿಲ್ಲೆಯ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಒಟ್ಟು 660 ಪ್ರತಿನಿಧಿಗಳಿಗೆ ಲಸಿಕೆ ನೀಡಲಾಗಿದ್ದು, ಮಂಗಳೂರಿನ ಪತ್ರಿಕಾ ಭವನದಲ್ಲಿ 442, ಪುತ್ತೂರು ಕೇಂದ್ರದಲ್ಲಿ 102, ಸುಳ್ಯ ಕೇಂದ್ರದಲ್ಲಿ 42, ಬೆಳ್ತಂಗಡಿಯಲ್ಲಿ 52, ಬಂಟ್ವಾಳ ತಾಲೂಕಿನಲ್ಲಿ 12 ಮಂದಿ ಲಸಿಕೆ ಹಾಕಿಸಿಕೊಂಡರು.
ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘ, ಪತ್ರಿಕಾ ಭವನ ಟ್ರಸ್ಟ್, ಪ್ರೆಸ್ ಕ್ಲಬ್ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಲಸಿಕಾ ಅಭಿಯಾನಕ್ಕೆ ರಾಜ್ಯ ಮುಜರಾಯಿ ಖಾತೆ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಮೇ 12ರಂದು ಚಾಲನೆ ನೀಡಿದ್ದು, ಈ ವೇಳೆ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಭಾಗವಾಗಿ ಕೊರೋನ ಮುಂಜಾಗ್ರತಾ ಕ್ರಮಗಳ ಜೊತೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ವಾರ್ತಾಧಿಕಾರಿ ಮಂಜುನಾಥ್, ಆರೋಗ್ಯ ಇಲಾಖೆಯ ಕೋವಿಡ್ ಲಸಿಕಾ ಅಭಿಯಾನದ ಸಂಚಾಲಕ ಡಾ.ರಾಜೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.