ಮಂಗಳೂರು : ಮನೆ ಮನೆ ಕಸ ಸಂಗ್ರಹಿಸುವ ಪೌರ ಕಾರ್ಮಿಕನ ಮೇಲೆ ಸ್ಥಳೀಯ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸದಾಶಿವ ನಗರ ವಾರ್ಡ್ ನಂಬ್ರ 2 ರಲ್ಲಿ ನಡೆದಿದೆ.
ಹಲ್ಲೆಗೊಳಗಾದ ಕಾರ್ಮಿಕ ರಾಜು ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಬಗ್ಗೆ ಮಂಗಳೂರು ಪೌರ ಕಾರ್ಮಿಕರ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಯೂನಿಯನ್ ಉಪಾಧ್ಯಕ್ಷ ಸುಧೀರ್ ಕುಲಾಲ್ ಮನೆ ಮನೆ ಕಸ ಸಂಗ್ರಹಿಸುವ ಕಾರ್ಮಿಕರ ಮೇಲೆ ನಿರಂತರ ಹಲ್ಲೆ , ಕಿರುಕುಳಗಳು ನಡೆಯುತ್ತಿದ್ದು ಇದನ್ನು ಸಂಘ ಖಂಡಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು ನಗರದಾದ್ಯಂತ ಕಸ ಸಂಗ್ರಹ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ. ಇಂತಹ ಘಟನೆಗಳು ಮುಂದುವರೆಯದಂತೆ ಕ್ರಮ ವಹಿಸಿ ಕಾರ್ಮಿಕರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.