ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡವೊಂದು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಗರದ ಪಂಪ್ವೆಲ್ ಬಳಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ (24) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ. ರಾತ್ರಿ ಸುಮಾರು 9:30ಕ್ಕೆ ಬಸ್ಸನ್ನು ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನೈತಿಕತೆಯ ಹೆಸರಿನಲ್ಲಿ ದುಷ್ಕರ್ಮಿಗಳು ಕಾನೂನು ಕೈಗೆತ್ತಿಕೊಂಡ ಆರೋಪ ಕೇಳಿ ಬಂದಿದೆ. ಒಂದು ವಾರದಲ್ಲಿ ಜಿಲ್ಲೆಯ ಸುರತ್ಕಲ್, ಬೆಳ್ತಂಗಡಿ, ಪಂಪ್ವೆಲ್ ಬಳಿ ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಯುವಕನೋರ್ವನ ಮೇಲೆ ನಗರದ ಪಂಪ್ ವೆಲ್ ಬಳಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಯುವಕ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿ ಕೇಸು ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿಯೇ ಕಾರ್ಯೋನ್ಮುಖರಾದ ಪೋಲೀಸ್ ಇಲಾಖೆ ಬಜರಂಗದಳದ ಸುಮಾರು ಹದಿನೈದಕ್ಕಿಂತಲೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ಈ ಮದ್ಯೆ ಕಾರ್ಯಕರ್ತರ ಆಕ್ರೋಶ ಕೂಡ ಶುರುವಾಗಿದ್ದು. ಸರಕಾರ ನಮ್ಮದೇ ಇದ್ದರೂ ಯಾವುದೇ ನಾಯಕರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ ಎಂಬ ದೂರುಗಳೂ ಕೆಲ ಕಾರ್ಯಕರ್ತರಿಂದ ಕೇಳಿಬಂದಿವೆ. ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಅನ್ಯಕೋಮಿನ ಜೋಡಿಗಳನ್ನು ಪತ್ತೆಹಚ್ಚಿ ನಿರಂತರವಾಗಿ ಕಾರ್ಯಾಚರಣೆಯಲ್ಲಿ ತೊಡಗಿರುವುದು ಕೆಲವು ಘಟನೆಗಳಿಗೆ ಕಾರಣವಾಗಿದ್ದ ಹಿನ್ನಲೆಯಲ್ಲಿ ಪೊಲೀಸರೂ ಅವರ ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ ಎನ್ನಲಾಗಿದೆ.