

ಮಂಗಳೂರು: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವೇಳೆ, ಸ್ಥಳೀಯ ಮೀನುಗಾರ ಯುವಕನೋರ್ವ ಈ ಕುರಿತಂತೆ ಪ್ರಶ್ನಿಸಿದ್ದಕ್ಕೆ ಆತನಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ನಡೆದಿದೆ.
ಘಟನೆಯು ಮುಂಜಾನೆ 2 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಪ್ರಶ್ನಿಸಿದ್ದರು. ಆಗ ಸುಮಾರು 15 ಮಂದಿಯ ತಂಡ ಹಲ್ಲೆಗೆ ಮುಂದಾಗಿದೆ. ಕೆಲವು ಮೀನುಗಾರರು ಈ ವೇಳೆ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಯುವಕನಿಗೆ ಹಾರೆಯಿಂದ ಬಲವಾದ ಹೊಡೆತ ಬಿದ್ದಿದ್ದು, ಆತನ ಬೆನ್ನು, ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಕ್ರಮ ಮರಳುಗಾರಿಕೆಯಿಂದ ಅಳಿವೆಬಾಗಿಲಿಗೆ ಹಾನಿಯಾಗುತ್ತಿದ್ದು, ಮೀನುಗಾರಿಕ ಬೋಟ್ಗಳ ಚಲನೆಗೆ ತೊಂದರೆಯಾಗಿದೆ ಎಂದು ಮೀನುಗಾರರು ದೂರಿದ್ದಾರೆ.
ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ಸಮುದ್ರ ಸೇರುವ ಈ ಸ್ಥಳದಲ್ಲಿ ಮರಳುಗಾರಿಕೆಗೆ ಅವಕಾಶವಿಲ್ಲ. ಆದಾಗ್ಯೂ ಕಳೆದ ಸುಮಾರು ಒಂದೂವರೆ ವರ್ಷದಿಂದ ಮರಳುಗಾರಿಕೆ ನಡೆಯುತ್ತಿದೆ. ಹೊರಭಾಗದ ಕೆಲವು ಮಂದಿ ಇಲ್ಲಿ ರಾತ್ರಿ ಮರಳು ಸಂಗ್ರಹಿಸಿ ಬೋಟ್ಗಳ ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದಾರೆ. ರವಿವಾರ ಮುಂಜಾವ ಕೂಡ ನೂರಾರು ಗೋಣಿಚೀಲಗಳಲ್ಲಿ ಮರಳು ಸಂಗ್ರಹಿಸಿರುವುದು, ಖಾಲಿ ಗೋಣಿಚೀಲಗಳನ್ನು ತಂದಿಟ್ಟಿರುವುದು ಕಂಡುಬಂದಿದೆ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.