ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ಸಂದರ್ಭದಲ್ಲಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಿಬ್ಬಂದಿಗೆ ವಿನಾಯಿತಿ ನೀಡಿ ಸಹಕರಿಸುವಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.
ಮಂಗಳವಾರ ಪತ್ರಕರ್ತರ ನಿಯೋಗ ಅವರನ್ನು ಭೇಟಿ ಮಾಡಿ, ಕೋವಿಡ್ ಕರ್ಫ್ಯೂ ಅವಧಿಯಲ್ಲಿ ಪತ್ರಕರ್ತರಿಗೆ ತೊಂದರೆಯಾಗುತ್ತಿರುವ ಬಗ್ಗೆ ವಿವರಿಸಿ, ವಿನಾಯಿತಿ ನೀಡುವಂತೆ ಮನವಿ ಮಾಡಿತು.
ಇದಕ್ಕೆ ಸ್ಪಂದಿಸಿದ ಪೊಲೀಸ್ ಕಮಿಷನರ್, ‘ಈ ಬಗ್ಗೆ ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆ ನೀಡಲಾಗುವುದು. ತಪಾಸಣೆ ನಡೆಸುವ ಪೊಲೀಸರಿಗೆ, ಮಾಧ್ಯಮ ಸಿಬ್ಬಂದಿ ತಮ್ಮ ಸಂಸ್ಥೆಯ ಗುರುತು ಚೀಟಿ (ಐಡಿ) ತೋರಿಸಿದಲ್ಲಿ ಅವರಿಗೆ ವಿಶೇಷ ವಿನಾಯಿತಿ ನೀಡಲಾಗುವುದು’ ಎಂದರು.
ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು. ಪತ್ರಕರ್ತರ ನಿಯೋಗದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಸತ್ಯವತಿ ಕೆ., ವಿಜಯ್ ಕೋಟ್ಯಾನ್ ಪಡು, ಭಾಸ್ಕರ್ ರೈ ಕಟ್ಟ, ಹರೀಶ್ ಮೋಟುಕಾನ, ಪತ್ರಕರ್ತರಾದ ಸುಖಪಾಲ್ ಪೊಳಲಿ, ನಿಖಿಲ್ ಇದ್ದರು.