ಮಂಗಳೂರು: ಆಗಸ್ಟ್ 2021ರ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸುವ ಬಗ್ಗೆ ದ.ಕ. ಜಿಲ್ಲಾ ಜಿಲ್ಲಾಧಿಕಾರಿಯವರೊಡನೆ ಸಭೆ ನಡೆದಿದೆ. ಕುಲಪತಿಗಳ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿಯವರ ಆದೇಶದಂತೆ ಮುಂದೂಡಲಾಗಿದ್ದ ಪರೀಕ್ಷೆಗಳನ್ನು ಆಗಸ್ಟ್ 11ರಿಂದ ಮರು ಪ್ರಾರಂಭಿಸಲು ತೀರ್ಮಾನಿಸಲಾಯಿತು. ಯಾವುದೇ ವಿದ್ಯಾರ್ಥಿಯು (ಹೊರ ರಾಜ್ಯದ ವಿದ್ಯಾರ್ಥಿಗಳನ್ನು ಸೇರಿಕೊಂಡಂತೆ) ವಾಹನ ಸೌಲಭ್ಯ ಅಥವಾ ಕೋವಿಡ್ ಸಮಸ್ಯೆಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸುವುದು, ಯಾವುದೇ ಕಾಲೇಜಿನಲ್ಲಿ ಪ್ರವೇಶ ಪತ್ರಕ್ಕೆ ಸಂಬಂಧಿಸಿ ಅಥವಾ ಯಾವುದೇ ಕಾರಣಗಳಿಂದ ವಿದ್ಯಾರ್ಥಿಗಳಿಂದ ಶುಲ್ಕವನ್ನು ಒತ್ತಾಯಪೂರ್ವಕವಾಗಿ ಪಡೆಯುವಂತಿಲ್ಲ ಹಾಗೂ ಶುಲ್ಕ ಪಾವತಿಸದೇ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುವು ಮಾಡಿಕೊಟ್ಟು ಅವರು ಅಂಕಪಟ್ಟಿಯನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಶುಲ್ಕವನ್ನು ಪಾವತಿಸಲು ಸೂಚಿಸುವುದು.
ಕೋವಿಡ್-19ರ ಎಲ್ಲಾ ಶಿಷ್ಟಾಚಾರಗಳನ್ನು ತಪ್ಪದೆ ಪಾಲಿಸಿಕೊಂಡು ಪರೀಕ್ಷೆ ನಡೆಸುವುದು. ಕೋವಿಡ್-19ರ ಹಿನ್ನಲೆಯಲ್ಲಿ ಕೈಗೆತ್ತಿಕೊಳ್ಳುವ ಯಾವುದೇ ಶೈಕ್ಷಣಿಕ ಅಥವಾ ಯಾವುದೇ ಕಾರ್ಯಕ್ರಮಗಳ ಕುರಿತ ವಿವರವಾದ ಮಾಹಿತಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ತಪ್ಪದೆ ನೀಡುವುದು. ಆದ್ದರಿಂದ ಮಾನ್ಯ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಹಾಗೂ ಮಾನ್ಯ ಕುಲಪತಿಯವರ ಒಪ್ಪಿಗೆಯಂತೆ ಬಾಕಿ ಇರುವ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್ 11ರಿಂದ ಮರು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ವೇಳಾಪಟ್ಟಿಯನ್ನು ಮುಂದೆ ತಿಳಿಸಲಾಗುತ್ತದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.