

ಮಂಗಳೂರು: ಬಸ್ ನಿಲ್ದಾಣ, ರೈಲು ನಿಲ್ದಾಣ, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್ಗಳನ್ನು ಕದಿಯುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಣಿಕಂಠ ಗೌಡ ಕೆ., ಕಾರ್ಕಳದ ಸತೀಶ್ ಬಂಗೇರ, ಮೂಡುಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳತನದ ಪ್ರಮುಖ ಆರೋಪಿ ಮಣಿಕಂಠ ಗೌಡ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ಮತ್ತು ದ.ಕ., ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ. ಮೆಕ್ಯಾನಿಕ್ ಆಗಿದ್ದ ಮಣಿಕಂಠ ಇಗ್ನಿಷನ್ ಸಾಕೆಟ್ನ ಪ್ಲಗನ್ನು ನಿಧಾನಕ್ಕೆ ತಪ್ಪಿಸಿ, ಕ್ಷಣಾರ್ಧದಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ. ರೀಸೇಲ್ ವ್ಯಾಲ್ಯೂ ಇರುವ ಬೈಕ್ಗಳನ್ನು ಕದಿಯುತ್ತಿದ್ದ. ಈತ ಹೆಚ್ಚಾಗಿ ಹೀರೋ ಹೋಂಡಾ ಸ್ಟೆಂಡರ್ ಬೈಕ್ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಹೀಗೆ ಕದ್ದ ಕೆಲವು ಬೈಕ್ ಗಳನ್ನು ಮೂಡುಬಿದಿರೆಯಲ್ಲಿ ಬಚ್ಚಿಟ್ಟುಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಂಡೇಶ್ವರ, ಬಟ್ಟೆ, ಮುಲ್ಕಿ, ಮಂಗಳೂರು ಬಂದರು, ಉಳ್ಳಾಲ, ಕಂಕನಾಡಿ ನಗರ ಠಾಣೆ ವ್ಯಾಪ್ತಿಯ 15 ಪ್ರಕರಣ ಮತ್ತು ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ 5 ಪ್ರಕರಣ ಸಹಿತ 20 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.