




ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಸುಹಾಸ್ ಶೆಟ್ಟಿಯ ಕ್ರಿಮಿನಲ್ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, ಇಂತಹ ವ್ಯಕ್ತಿಗಳನ್ನು ವೈಭವೀಕರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿಗೆ ಶನಿವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು “ಸುಹಾಸ್ ಶೆಟ್ಟಿ ಮೇಲೆ ಎರಡು ಕೊಲೆ ಪ್ರಕರಣಗಳು ಸೇರಿದಂತೆ ಒಟ್ಟು ಐದು ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಆತ ಓರ್ವ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿ. ಕ್ರಿಮಿನಲ್ಗಳನ್ನು ವೈಭವೀಕರಿಸುವ ಕೆಲಸವನ್ನು ಯಾರೂ ಮಾಡಬಾರದು. ಈ ಬಗ್ಗೆ ರಾಜಕೀಯ ಪಕ್ಷಗಳಿಗೂ ಅರಿವಿರಬೇಕು. ಸರ್ಕಾರವಾಗಲಿ, ಪೊಲೀಸರಾಗಲಿ ಆತನನ್ನು ವೈಭವೀಕರಿಸಿಲ್ಲ.” ಎಂದು ಖಡಾಖಂಡಿತವಾಗಿ ನುಡಿದರು.
“ಸುಹಾಸ್ ಶೆಟ್ಟಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರು ಆತನನ್ನು ಕರೆದು ಮುಂಚಿತವಾಗಿಯೇ ಎಚ್ಚರಿಸಿದ್ದರು.” ಎಂಬ ಮಾಹಿತಿಯನ್ನೂ ಸಚಿವರು ಬಹಿರಂಗಪಡಿಸಿದರು.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, “ಹಿಂದೆ ಆಗಿರುವುದು ಒಂದು ಭಾಗ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ದ.ಕ. ಮತ್ತು ಉಡುಪಿ ಜಿಲ್ಲೆ ಕಮ್ಯುನಲ್ ಕೃತ್ಯದಲ್ಲಿತೊಡಗಿದವರ ಹುಟ್ಟು ಅಡಗಿಸುವ ನಿಟ್ಟಿನಲ್ಲಿ ಸರಕಾರ ಶ್ರಮಿಸುತ್ತಿದ್ದು ಈ ಉದ್ದೇಶಕ್ಕಾಗಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಡಾ.ಜಿ.ಪರಮೇಶ್ವರ ಪ್ರಕಟಿಸಿದರು. ಯಾರು ಕಮ್ಯುನಲ್ ಕೃತ್ಯದಲ್ಲಿ ತೊಡಗುತ್ತಾರೆ ಮತ್ತು ಯಾರು ಅವರಿಗೆ ಬೆಂಬಲ ನೀಡುತ್ತಾರೆ.ಅವರ ವಿರುದ್ಧ ಈ ಫೋರ್ಸ್ ನಿರ್ದಾಕ್ಷಿಣ್ಯವಾಗಿ ಕ್ರಮಕೊಳ್ಳಲಿದೆ. ಪ್ರಚೋದನೆಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸುಹಾಸ್ ಶೆಟ್ಟಿ ಕೊಲೆಯಾದ ನಂತರ ಮಂಗಳೂರಿನಲ್ಲಿ ನಡೆದಿದ್ದ ಮತ್ತೊಂದು ಚೂರಿ ಇರಿತ ಪ್ರಕರಣದ ಬಗ್ಗೆಯೂ ಮಾತನಾಡಿದ ಗೃಹ ಸಚಿವರು. “ಈ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.” ಎಂದು ತಿಳಿಸಿದರು.
ನಗರದ ಕಾನೂನು ಸುವ್ಯವಸ್ಥೆ ಹಾಗೂ ಹತ್ಯೆ ಪ್ರಕರಣದ ತನಿಖೆಯ ಪ್ರಗತಿ ಪರಿಶೀಲಿಸಲು ಗೃಹ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದರು.