




ಮಂಗಳೂರು: ಇಂದು ನಗರಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ನಗರದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಶಾರುಖ್ ಖಾನ್ ಅವರು ಭಾಗವಹಿಸಲಿದ್ದು, ಈ ಕಾರ್ಯಕ್ರಮವು ಆಹ್ವಾನಿತರಿಗೆ ಮಾತ್ರ ಸೀಮಿತವಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಕಾರ್ಯಕ್ರಮ ಸ್ಥಳಕ್ಕೆ ಪ್ರವೇಶ ನೀಡಲಾಗುವುದು. ಪಾಸ್ ಇಲ್ಲದೆ ಆಗಮಿಸುವವರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದೆ.
ಇನ್ನೊಂದೆಡೆ, ವಾಹನ ಸಂಚಾರ ಸುಗಮವಾಗಿರಲು ಸ್ಥಳೀಯ ಪೊಲೀಸರು ಹೆದ್ದಾರಿ ಸಂಚಾರಕ್ಕೆ ಆದ್ಯತೆ ನೀಡಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆದ್ದಾರಿ ಸುತ್ತಮುತ್ತ ಸಾರ್ವಜನಿಕರು ಗುಂಪುಗೂಡದಂತೆ ಹಾಗೂ ಅನಗತ್ಯವಾಗಿ ವಾಹನ ನಿಲುಗಡೆ ಮಾಡದಂತೆ ಸೂಚಿಸಲಾಗಿದೆ.
ನಗರದ ಸಂಚಾರ ವ್ಯವಸ್ಥೆ ಸುಗಮವಾಗಿರಲು ಹಾಗೂ ಭದ್ರತಾ ಕ್ರಮಗಳಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.








