


ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳವಾರ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಬ್ರಾಹಿಂ ಹಳೀರ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಣಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ, ನಿವೃತ್ತ ಯೋಧ ಜಗನ್ನಾಥ ಶೆಟ್ಟಿ ಭಾಗವಹಿಸಿದ್ದರು.
ಎಸ್.ಡಿ.ಎಂ.ಸಿ ಸದಸ್ಯರು, ಊರಿನ ಸಂಘ ಸಂಸ್ಥೆಗಳ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ, ಶಿಕ್ಷಕ-ಶಿಕ್ಷಕಿಯರು, ಅಡುಗೆ ಸಿಬ್ಬಂದಿ, ವಿದ್ಯಾರ್ಥಿಗಳ ಪೋಷಕರು ಹಾಗೂ ಊರಿನ ಪ್ರಮುಖರು ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ, ಸಮೂಹ ಗಾಯನ ಮತ್ತು ಆಕರ್ಷಕ ಪಥ ಸಂಚಲನ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಮತ್ತು ಸಿಹಿಯೂಟ ವಿತರಿಸಲಾಯಿತು.
ಶಿಕ್ಷಕಿ ಅಮೃತಾ ಎಸ್. ಜೋಶಿ ಸ್ವಾಗತಿಸಿದರು. ಸಹಶಿಕ್ಷಕಿ ಪ್ರಮೀಳಾ ಪಿ ನಿರೂಪಿಸಿದರು. ದೈಹಿಕ ಶಿಕ್ಷಕಿ ಉಷಾ ಎ. ವಂದಿಸಿದರು.








