ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮಂಜೇಶ್ವರ ಪಾವೂರು ಗ್ರಾಮದ ಮಚ್ಚಂಪಾಡಿ ನಿವಾಸಿ ನವಾಜ್(40), ಬಂಟ್ವಾಳ ಫರಂಗಿಪೇಟೆಯ ಪುದು ಗ್ರಾಮದ ಜುಮಾದಿ ಗುಡ್ಡೆ ಮನೆ ನಿವಾಸಿ ಅಜರುದ್ದೀನ್ ಯಾನೆ ಅಜರ್(38) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 120 ಗ್ರಾಂ ತೂಕದ 6,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-3, ಡಿಜಿಟಲ್ ತೂಕ ಮಾಪನ, ಸುಝುಕಿ ಅಕ್ಸಿಸ್ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,83,120 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಮತ್ತು ಮಾದಕ ವಸ್ತು ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿದ್ದಾರೆ.