
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.


ಅಪಘಾತದಿಂದ ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ, ಕಬಕ ನಿವಾಸಿ ಸತೀಶ್ ರಾವ್, ಅವರ ಪತ್ನಿ, ಪಡುಮಲೆ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಭಟ್ ಹಾಗೂ ಕಾರಿನಲ್ಲಿದ್ದ ಮಗುವಿಗೆ ಗಾಯಗಳಾದ್ದು, ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಮೆಲ್ಕಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಅವರು ಇದೇ ಮಾರ್ಗವಾಗಿ ಬರುತ್ತಿದ್ದ ವೇಳೆ ಅಪಘಾತಕ್ಕೀಡಾದ ಕಾರನ್ನು ಮತ್ತು ಗಾಯಾಳುಗಳನ್ನು ಗಮನಿಸಿದ ಅವರು, ತಕ್ಷಣ ಉಪಚರಿಸಿ ತನ್ನ ಕಾರಿನಲ್ಲಿ ಬಿಸಿರೋಡ್ನ ಸೋಮಯಾಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ತೀವ್ರ ಗಾಯಗಳಾಗಿರುವ ಹಿನ್ನೆಯಲ್ಲಿ ನಾಲ್ವರು ಗಾಯಾಳುಗಳನ್ನು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.








