ಕಡಬ: ಎರಡು ವಾರಗಳ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಾದತ್ ಆಲಿ ಫರಂಗಿಪೇಟೆ (30) ಹಾಗೂ ಹಮೀದ್ ವಳಚ್ಚಿಲ್ (31) ಬಂಧಿತರು.
ಆರೋಪಿಗಳು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮಾ. 11ರಂದು ರಾಮಕುಂಜ ಗ್ರಾಮದ ನೆಬಿಸಾ ಅವರ ಮನೆಯ ಹಿಂಬಾಗಿಲಿನ ಕಬ್ಬಿಣದ ಶಟರ್ ಮುರಿದು, ಬೀಗ ತೆಗೆದು ರೂಮ್ನ ಕಪಾಟಿನಲ್ಲಿದ್ದ 1.08 ಲಕ್ಷ ರೂ. ನಗದು ಹಾಗೂ 13 ಪವನ್ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ನೆಬಿಸಾ ಅವರ ಪುತ್ರ ಸಿದ್ದಿಕ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನೆಬಿಸಾ ಅವರು ಮಗಳು ನಸೀಮಾ, ಅಳಿಯ ನಾಸೀರ್ ಹಾಗೂ ಮಕ್ಕಳೊಂದಿಗೆ ಮಾ.7ರಂದು ಮನೆಗೆ ಬೀಗ ಹಾಕಿ ನಸೀಮಾ ಅವರ ಹೆರಿಗೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ತೆರಳಿದ್ದು,.ಮಾ. 11ರಂದು ಮಧ್ಯಾಹ್ನ 3.30ರ ವೇಳೆಗೆ ನೆಬಿಸಾ ಸಂಬಂಧಿಕರು ಈ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು.
ನೆಬಿಸಾ ಅವರ ಎದುರಿನ ಮನೆಯವರ ಸಿಸಿಟಿವಿಯಲ್ಲಿ ಮಾ. 11ರ ಮುಂಜಾನೆ 2.30ರ ವೇಳೆಗೆ ಕಾರಿನಲ್ಲಿ ಬಂದವರು ನೆಬಿಸಾ ಅವರ ಮನೆಗೆ ಹೋಗಿ ಅಲ್ಲಿಂದ ಸುಮಾರು ಹೊತ್ತಿನ ಬಳಿಕ ಬಂದು ಮತ್ತೆ ಕಾರಿನಲ್ಲಿ ತೆರಳಿರುವ ದೃಶ್ಯ ಸೆರೆಯಾಗಿತ್ತು.
ವಳಚ್ಚಿಲ್ ನಿವಾಸಿಯಾಗಿರುವ ಹಮೀದ್ಗೆ ಕುಂತೂರಿನಿಂದ ಮದುವೆಯಾಗಿದ್ದು ಮದುವೆಯ ಬಳಿಕ ಪತ್ನಿ ಮನೆಯಲ್ಲಿಯೇ ವಾಸವಾಗಿದ್ದು,ಎರಡು ತಿಂಗಳ ಹಿಂದೆ ಹಮೀದ್ ಸೇರಿ ಇಬ್ಬರು ನೆಬಿಸಾ ಅವರ ಮನೆಗೆ ಕಟ್ಟಿಗೆ ತುಂಡರಿಸಲು ಬಂದಿದ್ದರು. ಮನೆಯವರೆಲ್ಲರೂ ಬೀಗ ಹಾಕಿ ಹೋಗಿರುವುದನ್ನು ತಿಳಿದುಕೊಂಡಿದ್ದ ಹಮೀದ್ ಫರಂಗಿಪೇಟೆಯ ಸ್ನೇಹಿತರಿಗೆ ಮಾಹಿತಿ ನೀಡಿ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಇತರ ಆರೋಪಿಗಳೊಂದಿಗೆ ಕಳವಿಗೆ ಕಾರಿನಲ್ಲಿ ಬಂದಿದ್ದ ಹಮೀದ್ ಕಾರಿನಲ್ಲೇ ಉಳಿದುಕೊಂಡಿದ್ದ ಎಂದು ಹೇಳಲಾಗಿದೆ.
ಪ್ರಕರಣದಲ್ಲಿ ಬಂಧಿತ ಇನ್ನೋರ್ವ ಆರೋಪಿ ಸಾದತ್ ಆಲಿ ವಿರುದ್ಧ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ವಿವಿಧ ಠಾಣೆಯಲ್ಲಿ ದಾಖಲಾಗಿವೆ.