

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡಿಗಡ ಮತ್ತು ಅರುಣಾಚಲ ಪ್ರದೇಶ ಅಧ್ಯಕ್ಷರ ನೇಮಕವನ್ನು ಎಐಸಿಸಿ ಹೊರಡಿಸಿದೆ.
ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್, ಅಂತಿಮವಾಗಿ ಸೌಮ್ಯರೆಡ್ಡಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಅವಕಾಶ ಮಾಡಿಕೊಟ್ಟಿದೆ. ಸೌಮ್ಯ ರೆಡ್ಡಿ ಒಂದು ಬಾರಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು.
ಇನ್ನು ಸೌಮ್ಯ ರೆಡ್ಡಿ ಮಾರ್ಚ್ 18, 1983ರಲ್ಲಿ ಜನಿಸಿದರು. ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್ನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಸೌಮ್ಯ ರೆಡ್ಡಿ ಪೂರ್ಣಗೊಳಿಸಿದ್ದಾರೆ.