ನವದೆಹಲಿ:-ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 20,050 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಿದ್ದಾರೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್ವೈ)ಯಡಿ ಮೀನುಗಾರಿಕೆ ಅಭಿವೃದ್ಧಿ ಮತ್ತು ರಫ್ತು ವಹಿವಾಟುಗಳಿಗೆ ಉತ್ತೇಜನ ನೀಡಲು ಈ ಮಹತ್ವಾಕಾಂಕ್ಷಿ ಯೋಜನೆಗೆ ಸಲಹೆ ನೀಡಲಾಗಿದೆ.
ದೇಶದ ಮೀನುಗಾರಿಕಾ ಕ್ಷೇತ್ರಕ್ಕೆ 20 ಸಾವಿರ ಕೋಟಿ ರು. ಅನುದಾನವನ್ನು ನೀಡುತ್ತಿರುವುದು ಇದೇ ಮೊದಲು. ಹೀಗಾಗಿ ಈ ಯೋಜನೆಯ ಬಗ್ಗೆ ಭಾರಿ ನಿರೀಕ್ಷೆ ಇದೆ. 2020-21ರಿಂದ 2024-25ರ ಅವಧಿಯಲ್ಲಿ ಇಷ್ಟೂ ಹಣವನ್ನು ವ್ಯಯಿಸಲು ನಿರ್ಧರಿಸಲಾಗಿದೆ.ರೈತರು, ಮೀನುಗಾರರು ಮತ್ತು ಪಶುಸಂಗೋಪನೆ-ಹೈನುಗಾರಿಕೆಯಲ್ಲಿ ತೊಡಗಿರುವವರ ಆದಾಯ ದ್ವಿಗುಣ ಮಾಡುವ ಉದ್ದೇಶವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.
ಅಕ್ಟೋಬರ್-ನವೆಂಬರ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಬಿಹಾರದ ಮೂಲಕ ಪ್ರಧಾನಿ ಮೋದಿ ವಿಡಿಯೋ ಲಿಂಕ್ ಮುಖಾಂತರ ಈ ಯೋಜನೆಗೆ ಚಾಲನೆ ನೀಡಿದ್ದರು. ಅಲ್ಲದೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿಗಾಗಿಯೂ ಕೆಲವು ಉಪಕ್ರಮಗಳನ್ನು ಪ್ರಧಾನಿ ಪ್ರಕಟಿಸಿದ್ದಾರೆ.ಈ ಯೋಜನೆ 21 ರಾಜ್ಯಗಳಲ್ಲಿ ವಿಸ್ತರಣೆಯಾಗಲಿದ್ದು, ಬಿಹಾರದಲ್ಲಿ ಗುರುವಾರ ಚಾಲನೆ ನೀಡಲಾಗಿದೆ ಎಂದು ಮೋದಿ ಹೇಳಿದರು.