



ಮಂಗಳೂರು: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದಿರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ, ಮಾರ್ಚ್ 18, 2026ರಂದು ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು.


ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಕೋಳಿಗಳಿಗೆ ಹರಿತವಾದ ಬಾಳ್ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಡುವುದರ ಜೊತೆಗೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ ಹುಂಜಗಳು ಹಾಗೂ ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 30/2026 ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 189(2), 193 ಹಾಗೂ 190 ಜೊತೆಗೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93 ಮತ್ತು ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960ರ ಕಲಂ 11(1)(ಟಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ.








