ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರ ಅಡ್ಡಗಟ್ಟಿ ನೈತಿಕ ಪೊಲೀಸ್ಗಿರಿ ನಡೆಸಿದ ಐವರು ಹಿಂದು ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜ್ವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾರಿನಲ್ಲಿ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಸಿದ್ದಾರೆ. ಕಾರಿನಲ್ಲಿದ್ದ ಮಹಿಳೆಯರು ತಕ್ಷಣ 112ಗೆ ಕರೆ ಮಾಡಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನಿಂದ ಶೃಂಗೇರಿ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವಿಭಿನ್ನ ಕೋಮಿನವರು ಎಂದು ತಿಳಿದು ಹಿಂದು ಸಂಘಟನೆಯ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಾದ ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಇವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ಭೇಟಿ ನೀಡಿದ್ದಾರೆ.