


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ದಲ್ಲಿ ಸುಮಾರು 5000 ಕೋಟಿ ರೂಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ. ಈ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪುತ್ರರಾಗಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ ಎಂದು ಬೆರಳು ತೋರಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಗಿಬಿದ್ದ ಬೆನ್ನಲ್ಲೇ ಇದರ ತನಿಖೆಗಾಗಿ ಸರ್ಕಾರ ಸಮಿತಿಯನ್ನೂ ರಚಿಸಿ 15 ದಿನಗಳೊಳಗೆ ವರದಿ ನೀಡುವಂತೆ ಆದೇಶ ನೀಡಿದೆ.
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಮುಡಾಗೆ 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ನೇರ ಆರೋಪಗಳನ್ನು ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತನಿಂದ ಮುಡಾಗೆ ಈ ಗತಿ ಬಂದಿದೆ. ಡಾ ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ದೂರಿದ್ದಾರೆ. 2019ರಲ್ಲಿ ಮುಡಾ ವಶದಲ್ಲಿದ್ದ 9000 ನಿವೇಶನಗಳಲ್ಲಿ 5000ಕ್ಕೂ ಅಧಿಕ ನಿವೇಶನಗಳನ್ನು ಕಾನೂನುಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಸಿಎನ್ ಮಂಜೇಗೌಡ, ಶಾಸಕ ಹರೀಶ್ ಗೌಡ ಸೇರಿದಂತೆ ಹಲವರ ವಿರುದ್ಧ ಅವರು ಅವ್ಯವಹಾರದ ಆರೋಪ ಹೊರಿಸಿದ್ದಾರೆ.
ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲೂ ನಿವೇಶನ ವರ್ಗಾವಣೆ ಕಾರ್ಯ ನಡೆದಿದ್ದು ಯತೀಂದ್ರ ಸಿದ್ದರಾಮಯ್ಯ ಅವರೇ ಮುಂದೆ ನಿಂತು ಇದನ್ನು ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನ ನಿರ್ಗಮಿತ ಡಿಸಿ ಡಾ.ಕೆ.ವಿ.ರಾಜೇಂದ್ರ ಮುಡಾ ಹಗರಣದ ಬಗ್ಗೆ ಕಳೆದ ನವೆಂಬರ್ನಲ್ಲೇ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಪತ್ರ ಈಗ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಿರುವುದರಿಂದ ಸರ್ಕಾರಕ್ಕೆ 1,000 ಕೋಟಿ ರೂ. ಗಿಂತಲೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪತ್ರದಲ್ಲಿ ಏನಿದೆ?
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಸುಧೀರ್ಘ ಪತ್ರದಲ್ಲಿ `ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ಪ್ರಕರಣಗಳಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲವೆಂದು, ಬದಲಿಯಾಗಿ ಅಭಿವೃದ್ಧಿ ಹೊಂದಿದ ಜಾಗದಲ್ಲಿ ಬೆಲೆಬಾಳುವ ಆಸ್ತಿಗಳನ್ನು ನೀಡಲಾಗಿದೆ. ನಿಯಮ ಬಾಹಿರವಾಗಿ 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಪ್ರಾಧಿಕಾರಕ್ಕೆ ಹಾಗೂ ಸರ್ಕಾರಕ್ಕೆ ಸುಮಾರು 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟವುಂಟಾಗಿದೆ. ಪ್ರಾಧಿಕಾರದ ಹಿಂದಿನ ಅಧ್ಯಕ್ಷರಾದ ಹೆಚ್.ವಿ ರಾಜೀವ್, ಯಶಸ್ವಿನಿ ಸೋಮಶೇಖರ್, ಹಿಂದಿನ ಆಯುಕ್ತರಾದ ಡಿ.ಬಿ ನಟೇಶ್, ಹಾಲಿ ಆಯುಕ್ತರಾದ ಜಿ.ಟಿ ದಿನೇಶ್ ಕುಮಾರ್, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಹರ್ಷವರ್ಧನ್, ವಿಷ್ಣುವರ್ಧನ ರೆಡ್ಡಿ ಮತ್ತು ಸಂಭಂಧ ಪಟ್ಟ ವಿಶೇಷ ತಹಶೀಲ್ದಾರರು ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಮುಡಾ ಹಗರಣದ ಕುರಿತು ಬಿಜೆಪಿ ಶಾಸಕ ಶ್ರೀವತ್ಸ ಅವರು ರಾಜ್ಯಪಾಲರಿಗೆ ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಸಾವಿರಾರು ಕೋಟಿ ಹಗರಣ ನಡೆದಿದೆ. ಕೂಡಲೇ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುವಂತೆ ಪತ್ರ ಬರೆದು ಒತ್ತಾಯಿಸುತ್ತೇನೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಆಗ್ರಹಿಸುತ್ತೇನೆ. ಪತ್ರದೊಂದಿಗೆ ಹಗರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನೂ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದ್ದಾರೆ.