ಇಂದಿನಿಂದ ಅ.24ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದ ಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಅನೇಕ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಇಂದಿನಿಂದ ಮೈಸೂರಿನಲ್ಲಿ ಐತಿಹಾಸಿಕ ವೈಭವ ಮರುಕಳಿಸಲಿದೆ.
ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಗೆ ಕಂಕಣಧಾರಣೆ ಮಾಡಲಾಗಿದ್ದು ಮುಂಜಾನೆ 5 ಗಂಟೆಯಿಂದ ಅರಮನೆಯಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಗಳು ಆರಂಭವಾಗಿವೆ.
ದಸರಾ ಕಾರ್ಯಕ್ರಮ ನಡೆಯಲಿರುವ ಸ್ಥಳಗಳಲ್ಲಿ ಪೊಲೀಸರ ನಿಯೋಜನೆ
ಇಂದಿನಿಂದ ಅ.24ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಸುರಕ್ಷಿತ ಸುಗಮ ಸಂಪ್ರದಾಯಿಕ ದಸರಾ ಆಚರಣೆಗೆ ಮೈಸೂರು ನಗರ ಪೊಲೀಸ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರು ನಗರ ಪೊಲೀಸರ ಸಜ್ಜಾಗಿದ್ದು ದಸರಾ ಕಾರ್ಯಕ್ರಮಗಳು ನಡೆಯಲಿರುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೈಸೂರು ನಗರ ಸೇರಿದಂತೆ ಇತರೆ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. 1 ಡಿಐಜಿ, 11 ಎಸ್ ಪಿ, 410 ಪೊಲೀಸ್ ಅಧಿಕಾರಿಗಳು, 3778 ಪೊಲೀಸ್ ಸಿಬ್ಬಂದಿ, ಒಟ್ಟು 4200 ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಸಶಸ್ತ್ರ ಪಡೆಗಳು, ವಿಧ್ವಂಸಕ ಕೃತ್ಯ ಪಡೆಗಳು, ಸ್ಫೋಟಕ ನಿಷ್ಕ್ರಿಯ ದಳ, ವಿಶೇಷ ಗರುಡ ಪಡೆ, ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ.