ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಉಚಿತ ಐದು ‘ಗ್ಯಾರಂಟಿ’ ಯೋಜನೆಗಳಿಗೆ ನೂತನ ಸರಕಾದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾವು ಇವತ್ತು ನಾನು, ಡಿಕೆ ಶಿವಕುಮಾರ್ ಹಾಗೂ 8 ಜನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದೇವೆ. ಇಂದಿನ ಸಭೆಯಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಆಗಮಿಸಿದ್ದರು. ಅವರೆಲ್ಲರೂ ಹೊಸ ಸರ್ಕಾರಕ್ಕೆ ಶುಭ ಕೋರಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ರಚನೆಯಾದ ಮೇಲೆ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಉಪಮುಖ್ಯಮಂತ್ರಿಯಾಗಿ ಎಲ್ಲಾ ಸಚಿವರು ಹಾಜರಿದ್ದರು. ನಾವು ಪ್ರಮುಖವಾಗಿ ಸಂಪುಟ ಸಭೆಯಲ್ಲಿ ಐದು ಪ್ರಮುಖ ಯೋಜನೆಗಳಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷೀ’, ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗಳ ಜಾರಿಗೆ ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ.ಮುಂದಿನ ಕ್ಯಾಬಿನೆಟ್ ಸಭೆ ನಂತರ ಪಂಚ ಯೋಜನೆಗಳ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.