ಮಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸ್ಯಾನಿಟರ್ ಪ್ಯಾಡ್ ವಿತರಿಸಲಾಗುವುದು. ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯ 15 ಸಾವಿರ ವಿದ್ಯಾರ್ಥಿನಿಯರಿಗೆ ಮೈತ್ರಿ ಕಪ್ ಆರಂಭಿಕವಾಗಿ ವಿತರಿಸಿದ್ದು, ಮುಂದೆ ರಾಜ್ಯಾದ್ಯಂತ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ 11 ಸಾವಿರ ಹಾಗೂ ಚಾಮರಾಜನಗರದಲ್ಲಿ 4 ಸಾವಿರ ಮೈತ್ರಿ ಯೋಜನೆಯ ಮುಟ್ಟಿನ ಕಪ್ ಸೇರಿ ಒಟ್ಟು 15 ಸಾವಿರ ಪಿಯುಸಿವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಣೆ ಮಾಡಲಾಗುವುದು. ಋತುಚಕ್ರದ ವೇಳೆ ಮಹಿಳೆಯರಿಗೆ ಎಲ್ಲದಕ್ಕೂ ಅನಾನುಕೂಲವಾಗುತ್ತದೆ. ಆದ್ದರಿಂದ ಅಂತಹ ಸನ್ನಿವೇಶ ಸೃಷ್ಟಿಯಾಗದಿರಲೆಂದು ಹಿಂದಿನ ಸಿದ್ದರಾಮಯ್ಯ ಸರ್ಕಾರ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಿತ್ತು. ಇದೀಗ ಮೂರು ವರ್ಷಗಳ ಬಳಿಕ ಸರ್ಕಾರ ಮೈತ್ರಿ ಯೋಜನೆಯ ಮೂಲಕ ಹೊಸದಾಗಿ ಮುಟ್ಟಿನ ಕಪ್ ವಿತರಣೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳ 40 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಣೆ ಮಾಡಲಾಗುತ್ತದೆ ಎಂದರು.
ಈ ಮುಟ್ಟಿನ ಕಪ್ನಿಂದ ಮಹಿಳೆಯರಿಗೆ ಹಣ ಉಳಿತಾಯವಾಗಲಿದೆ. ಅಲ್ಲದೆ ಋತುಚಕ್ರದ ದಿನಗಳಲ್ಲಿ ಮುಟ್ಟಿನ ಕಪ್ ಧರಿಸಿ ಹೆಣ್ಣುಮಕ್ಕಳು ಧೈರ್ಯವಾಗಿ ಸಂಕೋಚವಿಲ್ಲದೆ ಹೋಗಬಹುದು. ಸ್ಯಾನಿಟರಿ ಪ್ಯಾಡ್ ಸಾಕಷ್ಟು ತ್ಯಾಜ್ಯ ಸೃಷ್ಟಿಸಿ ಪರಿಸರಕ್ಕೆ ಮಾರಕವಾಗಿದೆ. ಆದರೆ ಮುಟ್ಟಿನ ಕಪ್ ಪರಿಸರ ಸ್ನೇಹಿಯಾಗಿದೆ. ಒಂದು ಮುಟ್ಟಿನ ಕಪ್ ಅನ್ನು ಕನಿಷ್ಠವೆಂದರೆ ಐದು ವರ್ಷಗಳ ಕಾಲ ಮರುಬಳಕೆ ಮಾಡಬಹುದು. ಮೊದಲಾಗಿ ಈ ಮುಟ್ಟಿನ ಕಪ್ ಅನ್ನು ಆರು ತಿಂಗಳ ಕಾಲ ಪ್ರಾಯೋಗಿಕವಾಗಿ ಬಳಸಿದಾಗ ಹೆಣ್ಣು ಮಕ್ಕಳ ತಾಯಂದಿರೇ ಇದಕ್ಕೆ ವಿರೋಧವಿದ್ದರು. ಆದ್ದರಿಂದ ತಾಯಂದಿರಿಗೂ ಜಾಗೃತಿ ಮೂಡಿಸಲಾಗಿತ್ತು ಎಂದು ದಿನೇಶ್ ಗುಂಡೂರಾವ್ ಹೇಳಿದರು.