




ಹುಬ್ಬಳ್ಳಿ : ಹುಬ್ಬಳ್ಳಿ–ಕಾರವಾರ ರಾಷ್ಟ್ರೀಯ ಹೆದ್ದಾರಿಯ ಅಂಚಟಗೇರಿ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ಕು ವರ್ಷದ ಹೆಣ್ಣುಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ನಿವಾಸಿಗಳಾದ ಮೆಹಬೂಬ್ ಖಾನ್ ಉಸ್ತಾದಿ (36) ಮತ್ತು ಅವರ ಪುತ್ರ ಅಸ್ಸೇನ್ (2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಅವರ ನಾಲ್ಕು ವರ್ಷದ ಪುತ್ರಿ ಅಜೀಜಾ ಅವರನ್ನು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ತಡಸ ಕಡೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೆಹಬೂಬ್ ಅವರು ಓವರ್ಟೇಕ್ ಮಾಡಲು ಯತ್ನಿಸಿದಾಗ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸವಾರ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








