ಮಂಗಳೂರು: ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ರವರು ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ದೇವರ ಹಾಡನ್ನು ಹಾಡುವ ಮೂಲಕ ಗಮನಸೆಳೆದರು.
ಮಂಗಳೂರಿನ ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಪಡೆದು ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗೆ ಆಗಮಿಸಿದ್ದರು.
ವೇದಿಕೆಯಲ್ಲಿ ಭಕ್ತಿ ಪ್ರಧಾನ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು, ಪೊಲೀಸ್ ಕಮೀಷನರ್ ಶಶಿಕುಮಾರ್ ರವರು ಎರಡು ಭಕ್ತಿ ಗೀತೆಗಳನ್ನು ಹಾಡಿದರು. ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ರವರ ಹಾಡಿಗೆ ನೆರೆದಿದ್ದ ಭಕ್ತಾದಿಗಳು ಪುಳಕಿತರಾದರು.
ಭಕ್ತಿ ಗೀತೆ ಹಾಡಿದ ಬಳಿಕ ಪೊಲೀಸ್ ಕಮೀಷನರ್ ಶಶಿಕುಮಾರ್ ರವರು ಸಂಗೀತ ನೀಡಿದ ಸಂಗೀತಗಾರರಿಗೆ ಖುದ್ದಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ದೇವಾಲಯದ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ರವರು, ಪಾಂಡೇಶ್ವರ ಕಮೀಷನರ್ ಶಶಿಕುಮಾರ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.