ನವದೆಹಲಿ: ಯಾಸ್ ಚಂಡಮಾರುತದ ಅರ್ಭಟಕ್ಕೆ ನಲುಗಿ ಹೋಗಿರುವ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರು ಒಡಿಸ್ಸಾಗೆ ತಕ್ಷಣವೇ 500 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ವೈಮಾನಿಕ ಸಮೀಕ್ಷೆಗೂ ಮುನ್ನ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ ಸಿಎಂ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ ಅವರು, ಯಾಸ್ ಚಂಡಮಾರುತ ಎಫೆಕ್ಟ್ ಒಡಿಸ್ಸಾದ ಮೇಲೆ ಹೆಚ್ಚು ಆಗಿದ್ದು, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ನಲ್ಲೂ ಚಂಡಮಾರುತದಿಂದ ಸಾಕಷ್ಟು ಹಾನಿ ಉಂಟಾಗಿದೆ ಎಂದು ಮಾಹಿತಿ ಪಡೆದುಕೊಂಡಿದ್ದರು. ಅಲ್ಲದೇ ಎರಡು ರಾಜ್ಯಗಳ ಜನರಿಗೆ ಆಶ್ವಾಸನೆ ನೀಡಿದ್ದ ಮೋದಿ, ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಬರಲಿದೆ.
ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳ ಪುನಃ ಮರು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದರು. ಇದರಂತೆ ತಕ್ಷಣ ಒಡಿಸ್ಸಾಗೆ 500 ಕೋಟಿ ರೂಪಾಯಿಗಳನ್ನು ತಕ್ಷಣಕ್ಕೆ ಬಿಡುಗಡೆ ಮಾಡಿದೆ.
ಉಳಿದಂತೆ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯಗಳಿಗೆ 500 ಕೋಟಿ ರೂಪಾಯಿಗಳನ್ನು ಸಮೀಕ್ಷೆ ನಡೆಸಿದ ಬಳಿಕ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅಲ್ಲದೇ ಚಂಡಮಾರುತ ಹೊಡೆತಕ್ಕೆ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರ ಚಿಕಿತ್ಸೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದರು.
ಇದೇ ವೇಳೆ ಸಂಕಷ್ಟಕ್ಕೆ ಒಳಗಾಗಿರುವ ಜನರ ನೆರವಿಗೆ ಬಂದು ಕಾರ್ಯ ನಿರ್ವಹಿಸುತ್ತಿರುವ ಎನ್ಡಿಆರ್ಎಫ್ ತಂಡಗಳಿಗೆ ಧನ್ಯವಾದ ತಿಳಿಸಿದರು.