Saturday, August 8, 2026
spot_imgspot_img
spot_imgspot_img

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪೊಲೀಸರ ಮೆಗಾ ಕಾರ್ಯಾಚರಣೆ: 4 ಮಂದಿ ವಶಕ್ಕೆ

- Advertisement -
- Advertisement -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗೆ ವೈಟ್‌ಫೀಲ್ಡ್ ಪೊಲೀಸರು ಇಂದು ಬೆಳಗ್ಗೆಯೇ ಮೆಗಾ ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ಹಲವು ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.

ವೈಟ್‌ಫೀಲ್ಡ್, ಕಾಡುಗೋಡಿ, ಮಾರತ್ತಹಳ್ಳಿ, ಬೆಳ್ಳಂದೂರು, ವರ್ತೂರು ಹಾಗೂ ಮಹದೇವಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮುಖ್ಯವಾಗಿ ಶೆಡ್‌ಗಳಲ್ಲಿ ವಾಸಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಗಳ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ವೈಟ್‌ಫೀಲ್ಡ್ ಡಿಸಿಪಿ ಸೈದುಲು ಅಡಾವತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಡಿಸಿಪಿ, ಇಬ್ಬರು ಎಸಿಪಿಗಳು ಹಾಗೂ ಆರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಸುಮಾರು 500 ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ. ಒಟ್ಟು 30 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಕೆಲಸಕ್ಕೆ ತೆರಳುವ ಮುನ್ನವೇ ಶೆಡ್‌ಗಳಿಗೆ ತೆರಳಿದ ಪೊಲೀಸರು ಅಲ್ಲಿ ವಾಸಿಸುತ್ತಿದ್ದವರ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆಧಾರ್ ಕಾರ್ಡ್, ವೋಟರ್ ಐಡಿ ಸೇರಿದಂತೆ ಮೂಲ ದಾಖಲೆಗಳನ್ನು ಪರಿಶೀಲಿಸಿ ಅನುಮಾನ ಬಂದವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ವೈಟ್‌ಫೀಲ್ಡ್ ಸುತ್ತಮುತ್ತಲಿನ ಶೆಡ್‌ಗಳಲ್ಲಿ ವಾಸಿಸುತ್ತಿದ್ದ ಕೆಲವರು ಸುತ್ತಲಿನ ಕಂಪನಿಗಳು, ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹೌಸ್‌ಕೀಪಿಂಗ್, ಕ್ಲೀನಿಂಗ್, ಪ್ಲಾಸ್ಟಿಕ್ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದವರ ದಾಖಲೆಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ. ಇದುವರೆಗೆ ಶಂಕಿತ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಮಂದಿಯ ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಅಕ್ರಮವಾಗಿ ದೇಶದಲ್ಲಿ ನೆಲೆಸಿರುವವರನ್ನು ಪತ್ತೆಹಚ್ಚಿ ಅವರ ಹಿನ್ನೆಲೆ ಹಾಗೂ ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಪೊಲೀಸರು ಶೋಧ ಹಾಗೂ ವಿಚಾರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!