ಬೆಂಗಳೂರು: ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಭೂಗತ ಪಾತಕಿ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಅದು ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ.
ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು.
ಮುಂಬೈನಲ್ಲಿ ನನ್ನ ಜೀವಕ್ಕೆ ಬೆದರಿಕೆ ಇದೆ. ಶಬನಂ ಡೆವಲಪರ್ಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾನೆ.
ಮುಂಬೈನಲ್ಲಿ ರವಿ ಪೂಜಾರಿ ಮೇಲಿನ ಪ್ರಕರಣವೊಂದರ ವಿಚಾರಣೆ ಬಾಕಿ ಇದೆ. ಅದಕ್ಕಾಗಿ ಮುಂಬೈ ಪೊಲೀಸರು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು. ಮುಂಬೈ ಪೊಲೀಸರು ವಶಕ್ಕೆ ತನ್ನನ್ನು ನೀಡುವುದು ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ರವಿ ಪೂಜಾರಿ ಉಲ್ಲೇಖಿಸಿದ್ದಾನೆ.
ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ಸೂಚನೆ ನೀಡಿರುವ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದೆ. 2019ರ ಜನವರಿ 19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು.