

ಕೇರಳದ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೇಟಿ ನೀಡಲಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ವಲಯದಲ್ಲಿ ಸೇನೆ ನಿರ್ಮಿಸಿದ ಪರಿಹಾರ ಶಿಬಿರ, ಆಸ್ಪತ್ರೆ ಮತ್ತು ಬೈಲಿ ಸೇತುವೆಯ ಬಳಿ ಮೋದಿ ಇಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ವಿಮಾನದಲ್ಲಿ ಕಣ್ಣೂರಿಗೆ ಬಂದಿಳಿಯಲಿರುವ ಮೋದಿ ನಂತರ ಈ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಅಂದರೆ ಕಣ್ಣೂರಿನಿಂದ ಮೋದಿ ಅವರು ಹೆಲಿಕಾಪ್ಟರ್ನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅವರು ಪ್ರಸ್ತುತ 10,000 ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿಗೆ ಆಗಮಿಸಿದ ನಂತರ ಪ್ರಧಾನಿ ಮೋದಿಯವರೊಂದಿಗೆ ಬರುವ ನಿರೀಕ್ಷೆಯಿದೆ ಎಂದು ಮಾಹಿತಿ ಇದೆ. ವಿಜಯನ್ ನೇತೃತ್ವದ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಒತ್ತಾಯಿಸುತ್ತಿವೆ.
ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 417 ಕ್ಕೆ ತಲುಪಿದ್ದು ಈ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ.