

ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?” ಎಂದು ಹೇಳಿದರು.
“ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ, ಇವರ ಯಾತ್ರೆಗೆ ‘ಗಿಫ್ಟ್’ ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು” ಎಂದರು








