ಮಂಗಳೂರು: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ದಲಿತ ಯುವತಿಯ ಗ್ಯಾಂಗ್ರೇಪ್ ಮತ್ತು ಬಳಿಕ ನಡೆದ ವಿದ್ಯಾಮಾನವನ್ನು ಖಂಡಿಸಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಯಿತು. ನಗರ ಲಾಲ್ ಬಾಗ್ ಬಳಿಯ ಗಾಂಧಿಯ ಪ್ರತಿಮೆಯ ಬಳಿ ಮೊಂಬತ್ತಿ ಬೆಳಗಿಸುವ ಮೂಲಕ ಮಿಥುನ್ ರೈ ಪ್ರತಿಭಟನೆಗೆ ಚಾಲನೆ ನೀಡಿದರು.
ಬಳಿಕ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆಯನ್ನು ತಡೆದು, ಉತ್ತರ ಪ್ರದೇಶದ ಸರಕಾರ, ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಯೋಗಿ ಆದಿತ್ಯನಾಥ್ ಪ್ರತಿಕೃತಿ ಯನ್ನು ದಹಿಸಲಾಯಿತು. ಬಳಿಕ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಘಟನೆಯ ಸಂಪೂರ್ಣ ನೈತಿಕ ಹೊಣೆ ಹೊತ್ತು ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಇನ್ನು ಆ ಸ್ಥಾನದಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ ಎಂದರು. ಅಲ್ಲದೆ ಈ ಸಂದರ್ಭದಲ್ಲಿ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮೇಲಿನ ಪೊಲೀಸರ ವರ್ತನೆಯನ್ನೂ ಖಂಡಿಸಿದರು.