


ಪುತ್ತೂರು: ಆಟೋ ರಿಕ್ಷಾಕ್ಕೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದ್ದು, ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುಗಳನ್ನು ಆಟೋ ಚಾಲಕ ಖಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್(13), ಮಹಮ್ಮದ್ ಇರ್ಷಾದ್(11), ಮಹಮ್ಮದ್ ರಾಝೀಕ್(9), ಮಹಮ್ಮದ್ ನೂರ್(5) ಮತ್ತು ಸಝ್ಮಾ(4) ಎಂದು ಗುರುತಿಸಲಾಗಿದೆ. ಇವರಲ್ಲಿ ಖಲಂದರ್ ಶಾಫಿ, ಸಝ್ಮಾ ಮತ್ತು ಮಹಮ್ಮದ್ ಜಾಝೀರ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾ.09 ರಂದು ಸಂಜೆ, ಆರೋಪಿ ಕಾರು ಚಾಲಕ ಸುಧನ್ವ ಎಂಬವರು ಕಾರ್ ನಲ್ಲಿ (KA-21-MA-0759) ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಾ, ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ಪರಿಣಾಮ, ಎದುರಿನಿಂದ ಶಾಲಾ ಮಕ್ಕಳನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದ ಖಲಂದರ್ ಶಾಫಿ ಎಂಬವರ ಆಟೋ ರಿಕ್ಷಾ(KA-21-C-1416)ಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಆಟೋ ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು, ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ನೀಡಿರುತ್ತಾರೆ. ಇಬ್ಬರು ಮಕ್ಕಳು ಹಾಗೂ ಚಾಲಕ ಖಲಂದರ್ ಶಾಫಿ ರವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅಕ್ರ :40/2026 ಕಲಂ: 281,125(a) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.








