ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿ, ಚಪ್ಪಲಿ ಹಾರ ಹಾಕಿದ ವಿಚಾರವಾಗಿ ಏಳು ಜನರನ್ನು ಬಂಧಿಸಿದ ಪೊಲೀಸರು ಅವರ ಮೇಲೆ ದೌರ್ಜನ್ಯ ಎಸಗಿರುವಆರೋಪಗಳು ಕೇಳಿ ಬರುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿದ್ದು, ಪೊಲೀಸರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಬಿಜೆಪಿ ಪಕ್ಷದ ಸೋಲಿನಿಂದ ಆಕ್ರೋಶಗೊಂಡ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿದ್ದರು. ಈ ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದ ಪೊಲೀಸರು ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವಂತೆ ಥಳಿಸಿ ಕಿರುಕುಳ, ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಪುತ್ತೂರು ಬಿಜೆಪಿ ನಾಯಕರ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಡಕ್ಕೆ ಮಣಿದು ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶಗಳು ಕೇಳಿ ಬರುತ್ತಿವೆ.
ವರದಿ ಆಧಾರಿಸಿ ಈ ಬಗ್ಗೆ ಆಂತರಿಕ ವಿಚಾರಣೆ ಆರಂಭಿಸಲಾಗಿದೆ ಎಂದು ದ.ಕ ಎಸ್ಪಿ ಐಪಿಎಸ್ ಡಾ. ವಿಕ್ರಮ್ ಅಮಟೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.