




ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆ ಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್ ಮಾತಾ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ” ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಶಾಲಾಕಾಲೇಜು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯತ್ತ ಮೊದಲ ಹೆಜ್ಜೆ ಇಟ್ಟವರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು. ವಾಜಪೇಯಿಯವರ ಆಡಳಿತದ ಅವಧಿಯಲ್ಲಿ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಮತ್ತೊಮ್ಮೆ ಮನೆ ಮನಗಳಿಗೆ ತಿಳಿಸುವ ಉದ್ದೇಶದಿಂದ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಳಗ್ಗೆ 9.30 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಬಳಿಕ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಕ್ಷದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ್ ಶೆಟ್ಟಿ, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್, ವಿಧಾನ ಪರಿಷತ್ತಿನ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರು ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ಪುತ್ತೂರಿನ ಪ್ರಭಾರಿ ಸುನಿಲ್ ಆಳ್ವ, ನಗರಸಭೆ ಅಧ್ಯಕ್ಷೆ ಲೀಲಾವತಿ , ಗೋಪಾಲಕೃಷ್ಣ ಹೇರಳ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.








