




ಪುತ್ತೂರು: ಈಶ್ವರಮಂಗಲದ ರೆಸ್ಟೋರೆಂಟ್ನಲ್ಲಿ ನಡೆದ ನಗದು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ ನೌಕರನಿಗೆ ಪುತ್ತೂರು ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಐವರ್ನಾಡು ನಿವಾಸಿ ಶಿವಪ್ರಸಾದ್ ಈ ಪ್ರಕರಣದ ಆರೋಪಿ.
ಈಶ್ವರಮಂಗಲದಲ್ಲಿರುವ ಶನ್ಯ ರೆಸ್ಟೋರೆಂಟ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆರೋಪಿ, 2024ರ ಏಪ್ರಿಲ್ 21ರಿಂದ 24ರ ನಡುವೆ ಕಿಚನ್ ವಿಭಾಗದ ಬಾಗಿಲು ಮುರಿದು ಡ್ರಾವರ್ನಲ್ಲಿದ್ದ ರೂ. 90,000 ನಗದನ್ನು ಕಳವು ಮಾಡಿದ್ದಾನೆ. ಈ ಕೃತ್ಯವು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಅದರ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದರು.
ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮ ಭಂಡಾರಿ ಅವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಚೇತನಾ ದೇವಿ ಅವರು ವಾದ ಮಂಡಿಸಿದರು.
ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಾಧೀಶ ದೇವರಾಜ್ ಅವರು ಆರೋಪಿಗೆ 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ರೂ. 10,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ 6 ತಿಂಗಳ ಹೆಚ್ಚುವರಿ ಸಾದಾ ಜೈಲುವಾಸ ಅನುಭವಿಸುವಂತೆ ಆದೇಶಿಸಲಾಗಿದೆ.








