


ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಕರ್ನಾಟಕದ 4 ಸ್ಥಾನಗಳಿಗೂ ಮತದಾನ ನಡೆಯಲಿದೆ.
ಎನ್ಡಿಎ ಹಾಗೂ ವಿರೋಧ ಪಕ್ಷಗಳ ಬಲಾಬಲದ ಲೆಕ್ಕಾಚಾರಕ್ಕೆ ಈ ಚುನಾವಣೆ ಮಹತ್ವ ಪಡೆದಿದೆ. ಮೇ 29ರಂದು ಅಧಿಸೂಚನೆ ಪ್ರಕಟವಾಗಲಿದೆ. ಜೂನ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 11 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಸಲಾಗುತ್ತದೆ.
ಮಹಾರಾಷ್ಟ್ರದ ಎನ್ಸಿಪಿ ನಾಯಕಿ ಸುನೇತ್ರಾ ಪವಾರ್ ಹಾಗೂ ತಮಿಳುನಾಡಿನ ಎಐಎಡಿಎಂಕೆಯ ಸಿ.ವಿ. ಷಣ್ಮುಗಂ ರಾಜೀನಾಮೆಯಿಂದ ತೆರವಾದ ಎರಡು ಸ್ಥಾನಗಳಿಗೆ ಇದೇ ದಿನ ಉಪಚುನಾವಣೆಯೂ ನಡೆಯಲಿದೆ. ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ರಾಜ್ಯಸಭೆ ಪ್ರವೇಶ ಪಡೆಯುತ್ತದೆಯೇ ಅಥವಾ ಮಿತ್ರಪಕ್ಷ ಕಾಂಗ್ರೆಸ್ಗೆ ಅವಕಾಶ ನೀಡುತ್ತದೆಯೇ ಎಂಬ ಕುತೂಹಲ ಮೂಡಿದೆ. ಮುಂದಿನ ತಿಂಗಳು ನಿವೃತ್ತಿಯಾಗಲಿರುವ ಪ್ರಮುಖ ಸದಸ್ಯರಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಕೇಂದ್ರ ಸಚಿವರಾದ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಸೇರಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ನಾಲ್ಕು ಸ್ಥಾನಗಳಿಗೆ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ಮೂರು ಸ್ಥಾನಗಳಿಗೆ, ಜಾರ್ಖಂಡ್ನಲ್ಲಿ ಎರಡು ಸ್ಥಾನಗಳಿಗೆ ಹಾಗೂ ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು ಪಕ್ಷಾತೀತವಾಗಿ ಮತ ಚಲಾಯಿಸಿದರೆ ಎನ್ಡಿಎ ತನ್ನ ಬಲವನ್ನು 15ರಿಂದ 17 ಸ್ಥಾನಗಳಿಗೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ವಿರೋಧ ಪಕ್ಷಗಳ ಸಂಖ್ಯೆಯೂ ಐದರಿಂದ ಏಳಕ್ಕೆ ಏರಬಹುದು ಎಂದು ಅಂದಾಜಿಸಲಾಗಿದೆ. ಲೋಕಸಭಾ ಚುನಾವಣೆಯ ಬಳಿಕ ವೈಎಸ್ಆರ್ ಕಾಂಗ್ರೆಸ್ ತನ್ನ ಮೂರು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.








