



ಮೈಸೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅನುಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಕೆಆರ್ಎಸ್ ಹಿನ್ನೀರಿನ ಬಳಿ ಇರುವ ಎಡಹಳ್ಳಿಯಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಸಂತೋಷ್ ಎಂಬಾತನಿಂದ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಧು ಎಂಬಾತನಿಗೆ ಸೇರಿದ ಜಮೀನಿನಲ್ಲಿ ಪಾರ್ಟಿ ಆಯೋಜಿಸಿದ್ದರು.
ಪಾರ್ಟಿಗೆ ಅಧಿಕೃತವಾಗಿ ಅನುಮತಿ ಪಡೆಯಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತೋಷ್ ಅಪ್ಲೋಡ್ ಮಾಡಿದ್ದರು. ಇದನ್ನು ನಂಬಿ 50ಕ್ಕೂ ಹೆಚ್ಚು ಜೋಡಿ ಪಾರ್ಟಿಗೆ ನೋಂದಾಯಿಸಿಕೊಂಡಿದ್ದರು. 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ತಲಾ 2 ಸಾವಿರ ವಸೂಲಿ ಮಾಡಿದ್ದರು.
ತಡರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ಪೊಲೀಸರು ದಿಢೀರ್ ಎಂಟ್ರಿ ಕೊಟ್ಟಿದ್ದು, ಪಾರ್ಟಿಯಲ್ಲಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ. ಅಡಿಷನಲ್ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಯುವತಿಯರ ಜೊತೆ ಕುಣಿದು ಕುಪ್ಪಳಿಸ್ತಿದ್ದವರು ಖಾಕಿ ಎಂಟ್ರಿ ಆಗುತ್ತಿದ್ದಂತೆ ಎದ್ನೋ ಬಿದ್ನೋ ಅಂತ ಕಾಲ್ಕಿತ್ತಿದ್ದರು. ಕೆಲ ಪುಂಡರು ಪೊಲೀಸರ ಮೇಲೂ ದಾಳಿ ಮಾಡಿದ್ದರು. ಆದರೆ 150ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸ್ ಎಲರ ರಕ್ತದ ಮಾದರಿ ಸಂಗ್ರಹಿಸಿದ್ದರು. ಕಾರ್ಯಕ್ರಮ ಆಯೋಜಕರು, ಜಮೀನಿನ ಮಾಲೀಕರ ವಿರುದ್ಧ ಕೇಸ್ ದಾಖಲಾಗಿದೆ. ಆದರೆ ಪಾರ್ಟಿ ನಡೆದ ಸ್ಥಳದಲ್ಲಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ ಎನ್ನಲಾಗುತ್ತಿದೆ.
ಈ ಘಟನೆ ಬಗ್ಗೆ ಇಲವಾಲ ಪೊಲೀಸ್ ಠಾಣೆಯಲ್ಲಿ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 221, 223, 121(2), BNS15(a), 32, 34, 38(a) KE ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಬಂಧಿತರನ್ನು ಮೈಸೂರು, ಮಡಿಕೇರಿ, ಬೆಂಗಳೂರು, ತಮಿಳುನಾಡು ಮೂಲದವರು ಎನ್ನಲಾಗುತ್ತಿದ್ದು, ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಮೈಸೂರಿನಲ್ಲಿ ನಡೆದಿರುವ ರೇವ್ ಪಾರ್ಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಪೊಲೀಸರ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಎಸ್ಪಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.








