




ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಬಸ್ ನಿಲ್ದಾಣ ಬಳಿ ಕಟ್ಟಡ ಮೇಲ್ಛಾವಣಿ ಸಜ್ಜಾ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ವಾಣಿಜ್ಯ ಮಳಿಗೆಗಳ ಕಟ್ಟಡ ಮಾಲೀಕ ಸಾದತ್ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆಯ ಕಟ್ಟಡ ಡೆಮಾಲಿಷ್ ಮಾಡದೇ ಬಳಸುತ್ತಿದ್ದ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕರು ಕೆಳಗೆ ನಿಂತಿದ್ದಾಗ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದು ದುರಂತ ನಡೆದಿದೆ. ಮೃತ ನಾಗರಾಜ್ ಅಭಿನಯಿಸಿದ್ದ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕರೆದಿದ್ದಕ್ಕೆ ಒಂದೇ ವಸತಿ ನಿಲಯದ ವಿದ್ಯಾರ್ಥಿಗಳು ಹೋಗಿದ್ದರು. 9 ಜನ ಪೋಸ್ಟರ್ ಅಂಟಿಸುತ್ತಿದ್ದ ವೇಳೆ ಮೇಲ್ಚಾವಣಿ ಕುಸಿದು ಬಿದ್ದಿದೆ. ಘಟನೆಯಲ್ಲಿ ನಾಗರಾಜ್, ರವಿಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಅರ್ಜುನ್ ಚಿಕಿತ್ಸೆ ಫಲಕಾರಿಯಾಗದೆ ಓಪೆಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಉಮೇಶ್, ಪ್ರಭು, ಅಭಿಷೇಕ್ ಘಟನೆಯಲ್ಲಿ ಗಾಯಗೊಂಡಿದ್ದು, ಗಾಯಾಳುಗಳಿಗೆ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ. ಹಳೆಯ ಕಟ್ಟಡ ಕುಸಿದು ಬಿದ್ದಿರುವುದರಿಂದ ಕಟ್ಟಡ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.








