




ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ತರಗತಿ ನಡೆಯುತ್ತಿದ್ದ ವೇಳೆಯೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಸಂಭವಿಸಿದೆ.
ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಶಿಕ್ಷಕರು ಎಲ್ಲಾ ಮಕ್ಕಳನ್ನು ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸುಮಾರು 2 ಸಾವಿರ ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಎಂದಿನಂತೆ ಶಾಲೆ ಪ್ರಾರಂಭವಾಗಿದೆ. 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ಮಕ್ಕಳನ್ನು ಹೊರಗೆ ಕಳುಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 3ನೇ ಮಹಡಿಯನ್ನೂ ಆವರಿಸಿಕೊಂಡಿದೆ.
ಶಾಲೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳ ಪೋಷಕರ ಸಭೆ ನಡೆಯುತ್ತಿರುವ ವೇಳೆಯೇ ಅವಘಡ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಬಳಿಕ ನೂರಾರು ಮಕ್ಕಳ ಪೋಷಕರು ಆತಂಕದಿಂದ ಶಾಲೆಗೆ ಧಾವಿಸಿದ್ದು, ಶಾಲೆಯ ಗೇಟ್ ಬಳಿ ಜಮಾಯಿಸಿದ್ದರು ಎಂಬುದಾಘಿ ಮೂಲಗಳಿಂದ ತಿಳಿದುಬಂದಿದೆ.







